ಜುಲೈ 5ರಂದು ಮೊದಲನೇ ಆಷಾಢ ಶುಕ್ರವಾರ: ಅಗತ್ಯ ಅಗತ್ಯ ಸಿದ್ಧತೆಗೆ ಅಪರ ಜಿಲ್ಲಾಧಿಕಾರಿ ಸೂಚನೆ

ಮೈಸೂರು: ಮೈಸೂರಿನ ಅಧಿದೇವತೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 2019ನೇ ಸಾಲಿನ ಆಷಾಡ ಶುಕ್ರವಾರಗಳು ಹಾಗೂ ಅಮ್ಮನವರ ಜನ್ಮೋತ್ಸನ ಧಾರ್ಮಿಕ ಕಾರ್ಯಕ್ರಮಗಳಿಗೆ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ಅನಾನುಕೂಲ ಉಂಟಾಗದಂತೆ ಕ್ರಮ ವಹಿಸಲು ಅಪರ ಜಿಲ್ಲಾಧಿಕಾರಿ ಬಿ.ಆರ್. ಪೂರ್ಣಿಮಾ ಅವರು ಸೂಚನೆ ನೀಡಿದರು.

ಈ ವರ್ಷ ಜುಲೈ 5 ರಂದು ಮೊದಲನೇ ಆಷಾಢ ಶುಕ್ರವಾರ, ಜುಲೈ 12 ರಂದು ಎರಡನೇ ಆಷಾಢ ಶುಕ್ರವಾರ, ಜುಲೈ 19 ರಂದು ಮೂರನೇ ಆಷಾಢ ಶುಕ್ರವಾರ, ಜುಲೈ 26 ಕೊನೆಯ ಆಷಾಢ ಶುಕ್ರವಾರಗಳಂದು ಹಾಗೂ ಜುಲೈ 24 ರಂದು ಶ್ರೀ ಚಾಮುಂಡೇಶ್ವರಿ ಅಮ್ಮನವರ ಜನ್ಮೋತ್ಸವ ವರ್ಧಂತಿ ಕಾರ್ಯಕ್ರಮಕ್ಕೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಹೆಚ್ಚಿನ ಭಕ್ತಾದಿಗಳು ಆಗಮಿಸುವ ನಿರೀಕ್ಷೆ ಇದ್ದು, ಸೂಕ್ತ ವ್ಯವಸ್ಥೆ ಕಲ್ಪಿಸಲು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಅವರು ತಿಳಿಸಿದರು.

ಚಾಮುಂಡಿಬೆಟ್ಟಕ್ಕೆ ಬರುವ ಎಲ್ಲ ಖಾಸಗಿ ವಾಹನಗಳನ್ನು ಹೆಲಿಪ್ಯಾಡ್ ಬಳಿ ನಿಲ್ಲಿಸಿ, ಅಲ್ಲಿಂದ ಬೆಟ್ಟಕ್ಕೆ ಉಚಿತವಾಗಿ ಕೆ.ಎಸ್.ಆರ್.ಟಿ.ಸಿ. ಬಸ್‍ಗಳ ಮೂಲಕ ಬರುವ ವ್ಯವಸ್ಥೆ ಮಾಡುವುದು, ಬಿಸಿಲು ಹಾಗೂ ಮಳೆಯಿಂದ ರಕ್ಷಣೆ ಪಡೆಯಲು ಎರಡು ವಾಟರ್ ಪ್ರೂಫ್ ತಾತ್ಕಾಲಿಕ ಪೇಂಡಾಲ್‍ಗಳನ್ನು ಅಳವಡಿಸುವುದು. ಭಕ್ತರ ಅನುಕೂಲಕ್ಕಾಗಿ ಹೆಲಿಪ್ಯಾಡ್ ಬಳಿಯಲ್ಲಿ ತಾತ್ಕಾಲಿಕ ಶೌಚಾಲಯ ನಿರ್ಮಿಸುವುದು. ದ್ವಿಚಕ್ರ ಹಾಗೂ ನಾಲ್ಕು ಚಕ್ರಗಳ ಖಾಸಗಿ ವಾಹನಗಳ ನಿಲುಗಡೆಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡುವುದು.

ಹೆಲಿಪ್ಯಾಡ್ ಬಳಿಯಲ್ಲಿ ಭಕ್ತಾದಿಗಳು ಬಸ್ಸುಗಳನ್ನು ಹತ್ತಲು ನಿಲ್ಲುವ ಸರತಿಯ ಸ್ಥಳದಲ್ಲಿ ತಾತ್ಕಾಲಿಕವಾದ ಬ್ಯಾರಿಕೇಡಿಂಗ್‍ಗಳನ್ನು ನಿರ್ಮಿಸುವುದು.

ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಬರುವುದರಿಂದ ಸರಗಳ್ಳತನ, ಜೇಬು ಕಳ್ಳತನ ಇತ್ಯಾದಿ ಅಹಿತಕರ ಘಟನೆಗಳನ್ನು ತಡೆಯಲು ಪ್ರಮುಖ ಸ್ಥಳಗಳಲ್ಲಿ ಸಿ.ಸಿ. ಕ್ಯಾಮರಾಗಳನ್ನು ಹಾಗೂ ವಿದ್ಯುದ್ದೀಪಗಳ ವ್ಯವಸ್ಥೆಗಳನ್ನು ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ವತಿಯಿಂದ ಮಾಡಬೇಕೆಂದು ತಿಳಿಸಿದರು.

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಮುಂಜಾಗ್ರತೆ ಕ್ರಮಕ್ಕಾಗಿ ಭಕ್ತಾದಿಗಳ ವೈದ್ಯಕೀಯ ಚಿಕಿತ್ಸೆಗಾಗಿ ಬೇಕಾದ ಅಗತ್ಯ ಔಷಧಗಳೊಂದಿಗೆ ಸಾಕಷ್ಟು ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳನ್ನು ನಿಯೋಜಿಸುವುದು. ಅಂಬ್ಯುಲೆನ್ಸ್ ವ್ಯವಸ್ಥೆ ಮಾಡುವುದು ಎಂದು ಆರೋಗ್ಯ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.

ಚಾಮುಂಡೇಶ್ವರಿ ಬೆಟ್ಟದಲ್ಲಿ ದಾಸೋಹ ಭವನದಲ್ಲಿ ನಡೆಯುವ ಪ್ರಸಾದ ವಿತರಣಾ ಕಾರ್ಯಕ್ರಮದ ಜೊತೆಗೆ ಭಕ್ತಾದಿಗಳು ಸಹ ಅಲ್ಲಲ್ಲಿ ಪ್ರಸಾದ ವಿತರಣೆ ಮಾಡುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಆಹಾರದ ಸುರಕ್ಷತೆಗೆ ಗಮನ ನೀಡಬೇಕು. ಆಹಾರ ಸುರಕ್ಷತಾ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅವರು ತಿಳಿಸಿದರು.

ಸಭೆಯಲ್ಲಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಪ್ರಸಾದ್, ಮುಡಾ ಅಧೀಕ್ಷಕ ಇಂಜಿನಿಯರ್ ಸುರೇಶ್ ಬಾಬು, ಮೈಸೂರು ತಹಶೀಲ್ದಾರ್ ಮಹೇಶ್ ಕುಮಾರ್, ಜಿಲ್ಲಾಧಿಕಾರಿಗಳ ಕಚೇರಿಯ ಶಿಷ್ಟಾಚಾರ ತಹಶೀಲ್ದಾರ್ ನರಗುಂದ್, ಎ.ಸಿ.ಪಿ. ಗಜೇಂದ್ರಪ್ರಸಾದ್ ಹಾಗೂ ಇಲಾಖಾ ಅಧಿಕಾರಿಗಳು ಭಾಗವಹಿಸಿದರು.

Scroll to Top